ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡು ಹಾರಿಸಿದ ಪ್ರಕರಣ ಸಂಬಂಧ ಮುಂಬೈನ ಬಾಂದ್ರ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿ ದಯಾ ನಾಯಕ್ ಮತ್ತು ಅವರ ನೇತೃತ್ವದ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿಯಲಾಗಿದೆ.
ಬಂಧಿತ ಆರೋಪಿಗಳು ವಿಕ್ಕಿ ಗುಪ್ತಾ ಹಾಗೂ ಸಾಗರ್ ಪಾಲ್ ಎಂದು ಗುರುತಿಸಲಾಗಿದೆ.
ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿಗಳನ್ನು ಸೋಮವಾರ ರಾತ್ರಿ ಗುಜರಾತ್ನ ಭುಜ್ನಲ್ಲಿ ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಖಚಿತಪಡಿಸಿದ್ದಾರೆ.
ಹೆಚ್ಚಿನ ತನಿಖೆಗಾಗಿ ಅವರನ್ನು ಮುಂಬೈಗೆ ಕರೆತರಲಾಗುವುದು ಎಂದು ಅವರು ತಿಳಿಸಿದ್ದಾರೆ.
ಎರಡು ಬೈಕ್ಗಳಲ್ಲಿ ಬಂದ ಇಬ್ಬರು ಆರೋಪಿಗಳು ಏಪ್ರಿಲ್ 14ರ (ಭಾನುವಾರ) ಮುಂಜಾನೆ 5 ಗಂಟೆ ವೇಳೆಗೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಎದುರು ನಾಲ್ಕು ಸುತ್ತು ಗುಂಡು ಹಾರಿಸಿ, ಸ್ಥಳದಿಂದ ಪರಾರಿಯಾಗಿದ್ದರು.
ಘಟನೆಯ ಬಳಿಕ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಘಟನೆಯ ಕುರಿತು ಸಲ್ಮಾನ್ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದರು. ಅಲ್ಲದೇ ಮುಂಬೈ ಪೊಲೀಸ್ ಕಮಿಷನರ್ ಜೊತೆ ಚರ್ಚಿಸಿ ಭದ್ರತೆ ಹೆಚ್ಚಿಸುವಂತೆ ಸೂಚಿಸಿದ್ದರು.
ಗುಜರಾತ್ನ ಭುಜ್ ನಲ್ಲಿ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಮಸಿಹಿ ಮೂಲದ ವಿಕ್ಕಿ ಸಾಹಬ್ ಗುಪ್ತಾ (24) ಮತ್ತು ಸಾಗರ್ ಶ್ರೀಜೋಗೇಂದ್ರ ಪಾಲ್ (21) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
0 Comments